ಲೋಕಾಯುಕ್ತ ದಾಳಿಗೊಳಗಾದ KREIS ಎಂಜಿನಿಯರ್ ಜನಾರ್ಧನ್ ಒಂದು ತಿಂಗಳಿಂದ ನಿಗೂಢ ನಾಪತ್ತೆ

 

ಲೋಕಾಯುಕ್ತ ದಾಳಿಗೊಳಗಾಗಿದ್ದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕೆಆರ್‌ಇಐಎಸ್) ಅಧೀಕ್ಷಕ ಅಭಿಯಂತರ ಎಚ್.ಎಂ. ಜನಾರ್ಧನ್ ಅವರು ಒಂದು ತಿಂಗಳಿನಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗೆ ಒತ್ತಾಯಿಸಿ ಕೆಆರ್‌ಎಸ್ ಪಕ್ಷವು ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ

ಬೆಂಗಳೂರು: ಇತ್ತೀಚೆಗೆ ಲೋಕಾಯುಕ್ತ ದಾಳಿಗೊಳಗಾಗಿದ್ದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕೆಆರ್‌ಇಐಎಸ್) ಅಧೀಕ್ಷಕ ಅಭಿಯಂತರ ಎಚ್.ಎಂ. ಜನಾರ್ಧನ್ ಅವರು ಕಳೆದಒಂದು ತಿಂಗಳಿ ನಿಂದ ನಿಗೂಢವಾಗಿ ನಾಪತ್ತೆಯಾಗಿದ್ದು, ಈ ಕುರಿತು ಸಮಗ್ರ ವಾದ ತನಿಖೆ ನಡೆಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್) ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದೆ.

ಲೋಕಾಯುಕ್ತ ದಾಳಿಗೊಳಗಾಗಿದ್ದ ಜನಾರ್ಧನ್ ಅವರು ಫೆ.7 ರಿಂದ ಇದುವರೆಗೂ ಕಚೇರಿಗೆ ಹಾಜರಾಗಿಲ್ಲ ಮತ್ತು ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿಲ್ಲ ಎಂಬ ಅಧಿಕೃತ ಮಾಹಿತಿಯನ್ನು ಕೆ.ಆರ್.ಇ.ಐ. ಎಸ್. ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರು ಲಿಖಿತವಾಗಿ ನೀಡಿದ್ದಾರೆ. ಒಬ್ಬ ಜವಾಬ್ದಾರಿಯುತ ಉನ್ನತ ಅಧಿಕಾರಿ ಸುದೀರ್ಘ ಕಾಲದಿಂದ ನಾಪತ್ತೆಯಾಗಿರುವುದು ಆಡಳಿತ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ. ಒಬ್ಬ ಉನ್ನತ ದರ್ಜೆಯ ಸರ್ಕಾರಿ ಅಧಿಕಾರಿ ಯಾವುದೇ ರಜೆ ಅಥವಾ ಮುನ್ಸೂಚನೆ ಇಲ್ಲದೆ 25ಕ್ಕೂ ಹೆಚ್ಚು ದಿನಗಳಿಂದ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಲೋಕಾಯುಕ್ತ ತನಿಖೆಗೆ ಹೆದರಿ ಅಥವಾ ಸಾಕ್ಷ್ಯಗಳನ್ನು ನಾಶಪಡಿಸುವ ಉದ್ದೇಶದಿಂದ ಅಧಿಕಾರಿ ತಲೆಮರೆಸಿಕೊಂಡಿದ್ದಾರೆಯೇ ಅವರ ನಾಪತ್ತೆಯ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆಯೇ ಎಂಬ ಸಂಶಯ ವ್ಯಕ್ತವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕೂಡಲೇ ಪೊಲೀಸ್ ಆಯುಕ್ತರು ಮಧ್ಯಪ್ರವೇಶಿಸಿ ತನಿಖೆ ನಡೆಸಿ ಅಧಿಕಾರಿಯನ್ನು ಪತ್ತೆ ಹಚ್ಚಬೇಕು ಎಂದು ಆಗ್ರಹಿಸಿದ್ದಾರೆ. ಸಾರ್ವಜನಿಕ ಕೆಲಸಗಳಿಗೆ ಅಡ್ಡಿಪಡಿಸುತ್ತಿರುವ ಮತ್ತು ಕಾನೂನಿನಿಂದ ತಪ್ಪಿಸಿಕೊಳ್ಳುತ್ತಿರುವ ಅಧಿಕಾರಿಯನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಬೇಕು. ಈ ಪ್ರಕರಣದ ಹಿಂದೆ ಯಾರೇ ಪ್ರಭಾವಿಗಳಿದ್ದರೂ ಅವರನ್ನು ಕಾನೂನಿನ ಮುಂದೆ ತರಬೇಕು ಎಂದು ಕೆಆರ್‌ಎಸ್ ಪಕ್ಷವು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ.

ಫೆಬ್ರವರಿ 16ರಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀಕ್ಷಕ ಅಭಿಯಂತರರಾದ (Superintendent Engineer) ಎಚ್.ಎಂ. ಜನಾರ್ಧನ್ ಅವರಿಗೆ ಸೇರಿದ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿಯ ವೇಳೆ ಅಧಿಕಾರಿಯ ಸ್ನೇಹಿತನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿತ್ತು. ಕೈಯಲ್ಲಿ ಹಣ ಎಣಿಸಲಾಗದೇ ಅಧಿಕಾರಿಗಳು ನೋಟು ಎಣಿಸುವ ಮೆಷಿನ್ ತರಿಸಿದ್ದರು.

ಅಧೀಕ್ಷಕ ಅಭಿಯಂತರ ಎಚ್.ಎಂ. ಜನಾರ್ಧನ್ ಅವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ್ದಾರೆ ಎಂಬ ಖಚಿತ ಮಾಹಿತಿ ಮತ್ತು ದೂರಿನ ಅನ್ವಯ ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಜನಾರ್ಧನ್ ಅವರಿಗೆ ಸೇರಿದ ಸ್ಥಳಗಳ ಜೊತೆಗೆ ಅವರ ಆಪ್ತ ಸ್ನೇಹಿತ ಸುಜಯ್ ಶೆಟ್ಟಿ ಎಂಬುವವರಿಗೆ ಸೇರಿದ ಪ್ಲಾಟ್ ಮೇಲೆಯೂ ದಾಳಿ ನಡೆಸಿದ್ದರು. ಈ ವೇಳೆ ಅಲ್ಲಿ ಬಚ್ಚಿಡಲಾಗಿದ್ದ ಬರೋಬ್ಬರಿ 1 ಕೋಟಿ 70 ಲಕ್ಷ ರೂಪಾಯಿ ನಗದು ಪತ್ತೆಯಾಗಿತ್ತು. ಈ ಹಣವು ಅಕ್ರಮವಾಗಿ ಗಳಿಸಿರುವುದಾಗಿದ್ದು, ಪತ್ತೆಯಾಗುವ ಭೀತಿಯಿಂದ ಸ್ನೇಹಿತನ ಮನೆಯಲ್ಲಿ ಇರಿಸಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದರು.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!